ಬೆಂಗಳೂರು: ಮಾರ್ಚ್ 20ರಂದು ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ಮಹಾಪಂಚಾಯತ್ ಸಮಾವೇಶದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಅವರು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದ್ದು ರದ್ದಾಗಬೇಕೆಂದು ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಬಿಜೆಪಿ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಆಗ್ರಹಿಸಿದ್ದಾರೆ.