ಬೆಂಗಳೂರು(29-11-2020): ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸೂಚನೆ ನೀಡಿದೆ. ಇದರಿಂದಾಗಿ ಪ್ರತಿವರ್ಷದಂತೆ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ರಜೆ ಎಂದು ಆಟವಾಡುವುದನ್ನು ಕಡಿಮೆ ಮಾಡಿ ಪಠ್ಯದ ಮೇಲೂ ಗಮನಹರಿಸುವಂತೆ ಪೋಷಕರು ನೋಡಿಕೊಳ್ಳಬೇಕಿದೆ.
ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆ. ಡಿಸೆಂಬರ್ ಮೂರನೇ ವಾರದಲ್ಲಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಶಾಲೆ ಪ್ರಾರಂಭವಾಗಿಲ್ಲ. ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳು ಪರಿಣಾಮಕಾರಿಯಾಗಿಲ್ಲ. ಈ ಮಧ್ಯೆ ಎಸೆಸೆಲ್ಸಿ ಪರೀಕ್ಷೆಗೆ ವೇಳಾಪಟ್ಟಿ ಸಿದ್ದತೆಯನ್ನು ಮಾಡಲಾಗುತ್ತಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ.